ದೊಡ್ಡಬಳ್ಳಾಪುರ : ಕೆರೆಯಂಗಳದಲ್ಲಿ ಕಸ ವಿಲೇವಾರಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ ಹಾಗೂ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತರದೇ ಕೆರೆ ಅಂಗಳದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯನ್ನು ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟು ರಸ್ತೆ ತೆರವುಗೊಳಿಸಬೇಕಿದೆ ಎಂದು ಪ್ರಬುದ್ಧ ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಯು.ಮುನಿರಾಜು ಅಗ್ರಹಿಸಿದರು.

ಕಂಟನಕುಂಟೆ ಪಂಚಾಯಿತಿ ವ್ಯಾಪ್ತಿಯ ಪಾಲನ ಜೋಗಹಳ್ಳಿ ಕೆರೆ ಅಂಗಳದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯನ್ನು ತೆರವುಗೊಳಿಸುವಂತೆ ಅಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಹಿಂದೆ ಕೆರೆಯ ಅಂಗಳದಲ್ಲಿ ಕಸ ವಿಲೇವಾರಿ ಕುರಿತು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು, ಸದ್ಯ ನಮ್ಮ ಕೆರೆ ಕಸಮುಕ್ತವಾಗಬೇಕಿದೆ ಹಾಗಾಗಿ ಅಧಿಕಾರಿಗಳು ಕೆರೆಯ ಅಂಗಳದಲ್ಲಿ ಕಸ ವಿಲೇವಾರಿಯನ್ನು ಸಂಪೂರ್ಣ ನಿಷೇಧಿಸುವ ಸಲುವಾಗಿ ಕೆರೆಯ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗ ಬೇಕಿದೆ ಎಂದರು.

ಇದ್ದಕ್ಕಿದ್ದಂತೆ ಕೆರೆಯ ಅಂಗಳದಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು ಸರ್ಕಾರಿ ಜಾಗದ ಒತ್ತುವರಿಯಾಗುತ್ತಿದೆ ಎಂದು ಆರೋಪಿಸಿದ್ದರು ಹಾಗೂ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ರಸ್ತೆಯ ಕಾಮಗಾರಿಯನ್ನು ತಡೆದು ರಸ್ತೆಯನ್ನು ತೆರವುಗೊಳಿಸುವ ಮೂಲಕ ಕೆರೆಯನ್ನು ಉಳಿಸಬೇಕೆಂದು ಮನವಿ ಮಾಡಿದರು.
ಭೂ ಪರಿವರ್ತನೆ ಕುರಿತು ಜಿಲ್ಲಾಧಿಕಾರಿಗಳು ಗಮನಹರಿಸಬೇಕಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯು ಸೂಕ್ತ ದಾಖಲಾತಿಗಳ ಆಧಾರದ ಮೇಲೆ ನೆಡೆಯಬೇಕಿದೆ ಆದರೆ ಕೆಲ ಸ್ಥಳೀಯ ಅಧಿಕಾರಿಗಳು ಸೂಕ್ತ ದಾಖಲಾತಿಗಳನ್ನು ಒದಗಿಸದೇ ಭೂ ಪರಿವರ್ತನೆ ಮಾಡಿಕೊಡುತ್ತಿದ್ದಾರೆ, ಜಿಲ್ಲಾಧಿಕಾರಿಗಳು ಈ ಕುರಿತು ಗಮನಹರಿಸಬೇಕಿದೆ , ಕೆಲ ಪ್ರಭಾವಿಗಳು ಸರ್ಕಾರಿ ಜಾಗಗಳನ್ನು ಕಬಳಿಸಲು ಮುಂದಾಗಿದ್ದು , ಬಡಾವಣೆಗಳ ನಿರ್ಮಾಣದಲ್ಲಿ ಯಾವುದೇ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಕಂಡುಬರುತ್ತಿದೆ, ಹಾಗಾಗಿ ಭೂ ಪರಿವರ್ತನೆಯ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಸೂಕ್ತ ದಾಖಲಾತಿಗಳನ್ನು ಪಡೆದು ಸ್ಥಳಕ್ಕೆ ಭೇಟಿ ನೀಡುವ ಮೂಲಕ ಪರಿಶೀಲಿಸಿ ನಂತರ ಭೂ ಪರಿವರ್ತನೆ ಪ್ರಕ್ರಿಯೆಗೆ ಮುಂದಾಗಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ವಿ ನಾಗರಾಜು, ರಾಜ್ಯ ಉಪಾಧ್ಯಕ್ಷ ಚೆಲುವ ಹನುಮಯ್ಯ, ರಾಜ್ಯ ಕಾರ್ಯದರ್ಶಿ ಎನ್ ಮುನಿರಾಜು, ರಾಜ್ಯ ಸಂಘಟನಾ ಸಂಚಾಲಕರಾದ ಅಪ್ಪಯಣ್ಣ, ರಾಮಚಂದ್ರ, ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ಕಾರ್ಯಧ್ಯಕ್ಷ ರಘು, ವಿಭಾಗೀಯ ಮಹಿಳಾ ಘಟಕದ ಅಧ್ಯಕ್ಷರಾದ ಮಂಜುಳಾ ರಾಮ್, ದೇವನಹಳ್ಳಿ ತಾಲೂಕು ಉಪಾಧ್ಯಕ್ಷ ಶಿವಾನಂದ್ ಸೇರಿದಂತೆ ಹಲವರು ಹಾಜರಿದ್ದರು.
