ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಜಿಲ್ಲೆಯ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ, ಬ್ರಿಗೇಡ್ ಫೌಂಡೇಷನ್ನಿಂದ ಸಿ.ಎಸ್.ಆರ್. ಅನುದಾನದಡಿ ನಿರ್ಮಿಸಲಾದ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು 2023 ಅಕ್ಟೋಬರ್ 02ರ ಗಾಂಧಿ ಜಯಂತಿ ದಿನದಂದು ಶಾಲೆಗಳ ನವೀಕರಣ, ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಒತ್ತು ನೀಡಲು ನಮ್ಮ ಸರ್ಕಾರವು ಎಲ್ಲಾ ಖಾಸಗಿ ಸಂಸ್ಥೆಗಳೊಂದಿಗೆ ಒಡಗೂಡಿ ಸಿ.ಎಸ್.ಆರ್. ಅನುದಾನದಡಿ ಶಾಲೆಗಳ ಅಭಿವೃದ್ಧಿಗೆ ತೀರ್ಮಾನ ಕೈಗೊಂಡಿತು. ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯವಾಗಿದೆ ಎಂದರು.
ಎಲ್.ಕೆ.ಜಿ ಯಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಬಡವರು, ರೈತರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ನೀಡಬೇಕು ಎಂಬುದು ನಮ್ಮ ತೀರ್ಮಾನ. ಬಹುತೇಕ ಕಂಪನಿಗಳು ಸಿ.ಎಸ್.ಆರ್. ಅನುದಾನದಡಿ ಕಾನ್ವೆಂಟ್ ಮಾದರಿ ಶಾಲೆ ಅಭಿವೃದ್ಧಿಪಡಿಸಲು ಪಣ ತೊಡಲಾಗಿದೆ ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಿ ದೇಶ ಸೇವೆಯ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನತೆ ಸಿಗಬೇಕು. ಜಗತ್ತಿನ ಬಲಿಷ್ಠ ರಾಷ್ಟ್ರಗಳ ಜೊತೆ ಭಾರತವನ್ನು ಕೊಂಡೊಯ್ಯಲು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂಬುದು ನಮ್ಮ ಆಶಯ ಎಂದರು.

ನಮ್ಮ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದವರು ಸರ್ಕಾರಿ ಶಾಲೆಗಳ ಸುಧಾರಣೆಗೆ ಸಹಕಾರವನ್ನು ನೀಡುತ್ತಿರುವುದು ಶ್ಲಾಘನೀಯ ಭಾರತ ರತ್ನ ಪಡೆದಿರುವ ನಮ್ಮ ಸರ್. ಎಂ. ವಿಶ್ವೇಶ್ವರಯ್ಯ ಅವರು ಯಾವ ರೀತಿ ಹಂತ ಹಂತವಾಗಿ ಬೆಳೆದು ಇಡೀ ಜಗತ್ತಿಗೆ ಮಾದರಿಯಾದವರು,ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಹಾಗಾಗಿ ಇವರ ಆದರ್ಶಗಳು ಮತ್ತು ನಡೆದ ಹಾದಿಯನ್ನು ಅರಿತು ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕು. “ಇಂದಿನ ಮಕ್ಕಳೇ ನಾಳಿನ ಪ್ರಜೆಗಳು” ಎಂದು ಗಾಂಧಿಯವರು ಹೇಳಿರುವ ಮಾತನ್ನು ವಿದ್ಯಾರ್ಥಿಗಳು ಮನಸ್ಸಿನಲ್ಲಿ ನಾಟಿಕೊಳ್ಳಬೇಕು. ಮಕ್ಕಳಿಗೆ ಮೊದಲ ಗುರು ತಂದೆತಾಯಿ, ನಂತರ ಶಿಕ್ಷಕರು; ಆದ್ದರಿಂದ ಶಿಕ್ಷಕರು ನೀಡುವ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

ಇನ್ಫೋಸಿಸ್ ಸಂಸ್ಥೆಯವರು ₹150 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳ ನವೀಕರಣ ಕಾರ್ಯವನ್ನು ಕೈಗೊಂಡಿದ್ದಾರೆ. ಹಾಗಾಗಿ ಸರ್ಕಾರ ನೀಡುತ್ತಿರುವ ಎಲ್ಲಾ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ಖಾಸಗಿ ಶಾಲೆಯ ಮಕ್ಕಳಿಗಿಂತ ಕಡಿಮೆ ಅಲ್ಲ ಎಂಬ ರೀತಿಯಲ್ಲಿ ಮುನ್ನುಗ್ಗಬೇಕು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಜಿ.ಪಂ ಸಿಇಒ ಡಾ. ಕೆ.ಎನ್. ಅನುರಾಧ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ. ಪಿ, ಬ್ರಿಗೇಡ್ ಫೌಂಡೇಷನ್ ಸಿಇಒ ಶಿವಯೋಗಿ ಸಿ. ಕಳಸದ, ಬ್ರಿಗೇಡ್ ನಾರ್ತ್ ಪ್ರಾಜೆಕ್ಟ್ನ ಸೀನಿಯರ್ ವೈಸ್ ಪ್ರೆಸಿಡೆಂಟ್ ಬಾಲಸುಬ್ರಮಣ್ಯನ್ ಎಂ.ಎನ್, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಜಗನ್ನಾಥ್, ವಿಶ್ವನಾಥಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವೆಂಕಟಮ್ಮ ಸೇರಿದಂತೆ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
