
ದೊಡ್ಡಬಳ್ಳಾಪುರ ಟೌನ್ ನ ಮುತ್ತೂರು ವಾರ್ಡ್ ಬಳಿ ಶುಕ್ರವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಗಾಯಗೊಂಡು ದೊಡ್ಡಬಳ್ಳಾಪುರದ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು ಬಳಿಕ ವೈದ್ಯರೊಂದಿಗೆ ಚರ್ಚಿಸಿ ಗಾಯಾಳುಗಳ ಆರೋಗ್ಯಕ್ಕೆ ಸಂಬಂಧಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು.
ನಂತರ ಟೌನ್ ನ ಮುತ್ತೂರು ವಾರ್ಡ್ ನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅವಘಡ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ನಂತರ ಮಾತನಾಡಿ ಈ ರೀತಿಯ ಘಟನೆಗಳು ಮುಂದೆ ಆಗಬಾರದು. ಜಿಲ್ಲೆಯಾದ್ಯಂತ ಗಣೇಶ ಕೂರಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆಯೋಜಕರಿಗೆ ಪಟಾಕಿ ಸಿಡಿಸದಂತೆ ಸೂಚನೆ ನೀಡಿ ಜೊತೆಗೆ ಗಣೇಶ ವಿಸರ್ಜನೆ, ಮೆರವಣಿಗೆ, ಸಂಭ್ರಮ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಹಾಗೇ ಜಿಲ್ಲೆಯಲ್ಲಿ ಇನ್ನೂ ಮುಂದೆ ಇನ್ನಿತರೇ ಯಾವುದೇ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಎಸಿ ದುರ್ಗಶ್ರೀ, ಡಿವೈಎಸ್ಪಿ ರವಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಸ್ಥಳೀಯ ಜನಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.