ದೊಡ್ಡಬಳ್ಳಾಪುರ : ಸುಮಾರು 20 ಹಕ್ಕೊತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.21ರ ಭಾನುವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ ನೆಡೆಯಲಿದೆ ಎಂದು ಸಿಪಿಐ (ಎಂ) ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸಿ ನರಸಿಂಹಮೂರ್ತಿ ತಿಳಿಸಿದರು.
ನಗರದ ಸಿಪಿಐ(ಎಂ) ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ರಾಜ್ಯದ್ಯಂತ ಸಹಿ ಸಂಗ್ರಹ ಮಾಡಲಾಗಿದೆ ಸುಮಾರು 20ಕ್ಕೂ ಹೆಚ್ಚು ಹಾಕ್ಕೋತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವರ್ಗಕ್ಕೆ ಹಾಗೂ ಸಾಮಾನ್ಯ ಜನತೆಗೆ ಕಲ್ಪಿಸಬೇಕಿರುವ ಸವಲತ್ತುಗಳನ್ನು ಹೋರಾಟ ಮಾಡಿ ಪಡೆಯುವ ಪರಿಸ್ಥಿತಿ ಎದುರಾಗಿದೆ. ಈ ಸಭೆಯಲ್ಲಿ ಭಾಗವಹಿಸಲು ನಮ್ಮ ಜಿಲ್ಲೆಯಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದರು .
ಜಿಲ್ಲಾ ಸಮಿತಿ ಸದಸ್ಯ ಚಂದ್ರು ತೇಜಸ್ವಿ ಮಾತನಾಡಿ ರಾಜ್ಯದ ಎಲ್ಲಾ ಬೆಳೆಗಳಿಗೆ ಒಟ್ಟಾರೆ ಉತ್ಪಾದನಾ ವೆಚ್ಚಕ್ಕೆ ಶೇ.50 ಲಾಭಾಂಶ ಸೇರಿಸಿ ಕನಿಷ್ಟ ಬೆಂಬಲ ಬೆಲೆ ಕಾಯ್ದೆ ಜಾರಿ ಮಾಡಬೇಕು. ರೈತಾಧಾರಿತ ಕೃಷಿ ರಕ್ಷಿಸಬೇಕು. ಕಾರ್ಪೊರೇಟ್ ಲಾಭದ ಕೃಷಿ ಕೈಬಿಡಬೇಕು ಬಲವಂತದ ಅನಗತ್ಯವಾದ ಭೂಸ್ವಾಧೀನ ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಕಾಲದಲ್ಲಿ ಜಾರಿಗೊಳಿಸಿದ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತರ ಭೂಮಿಯನ್ನು ರಕ್ಷಿಸಬೇಕು. ಬಡವರಿಗೆ ದಲಿತರಿಗೆ ಭೂಮಿಗಳನ್ನು ನೀಡಬೇಕು. ಬಗೈರ್ ಹುಕುಂ ಮತ್ತು ಅರಣ್ಯ ಸಾಗುವಳಿ ಭೂಮಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು. ಬೆಂಗಳೂರಿನ ಸುತ್ತಮುತ್ತ ವಿವಿಧ ಉದ್ದೇಶಗಳಿಗೆ ಕೈಗಾರಿಕಾ ಅಭಿವೃದ್ಧಿ ಹೆಸರಿನಲ್ಲಿ ರೈತರ ಒಪ್ಪಿಗೆ ಇಲ್ಲದೆ ನಡೆಯುತ್ತಿರುವ ಬಲವಂತದ ಭೂಸ್ವಾಧೀನ ಕೂಡಲೇ ನಿಲ್ಲಬೇಕು ಎಂದು ಅಗ್ರಹಿದರು.
ಜಿಲ್ಲಾ ಸಮಿತಿ ಸದಸ್ಯ ಪಿ ಎ ವೆಂಕಟೇಶ್ ಮಾತನಾಡಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಪೂರ್ಣಗೊಂಡು ನಾಲ್ಕು ವರ್ಷಗಳಿಂದ ಉದ್ಘಾಟನೆಯಾಗದಿರುವ ESI ಆಸ್ಪತ್ರೆ ಕೂಡಲೇ ಉದ್ಘಾಟನೆಯಾಗಬೇಕು ಅಲ್ಲದೇ ಗೃಹ ಕೈಗಾರಿಕೆಯಾದ ನೇಯ್ದೆ ಉದ್ದಿಮೆ ಉಳಿಸಲು ಸರ್ಕಾರ ಮಧ್ಯ ಪ್ರವೇಶ ಮಾಡಬೇಕು, ಜಿಲ್ಲೆಯಲ್ಲಿ ಮತ್ತು ದೊಡ್ಡಬಳ್ಳಾಪುರದಲ್ಲಿ ಈ ಉದ್ದಿಮೆಯನ್ನೇ ನಂಬಿ ಲಕ್ಷಾಂತರ ಜನರು ಬದುಕುತ್ತಿದ್ದಾರೆ ಇವರು ಉತ್ಪಾದಿಸಿದ ಬಟ್ಟೆಗೆ ಬೆಲೆ ಮತ್ತು ಬೇಡಿಕೆ ಇಲ್ಲದೆ ತುಂಬಾ ಸಂಕಷ್ಟದಲ್ಲಿದ್ದಾರೆ. ಹೊರರಾಜ್ಯದ ಸೀರೆಗಳು ಮಾರುಕಟ್ಟೆಯನ್ನು ಆಕ್ರಮಿಸಿ ಕೊಂಡಿವೆ ಇದರಿಂದ ಉದ್ಭವಿಸಿದ ಬಿಕ್ಕಟ್ಟಿನ ಪರಿಹಾರಕ್ಕೆ ರಾಜ್ಯ-ಕೇಂದ್ರ ಸರ್ಕಾರಗಳು ತಕ್ಷಣ ಮುಂದಾಗಬೇಕು. ನೇಕಾರ ಕಾರ್ಮಿಕರೆಲ್ಲರಿಗೂ ಸಮಾನ ಕೆಲಸದ ಸಮಯ ಮತ್ತು ಕೂಲಿ ನಿಗದಿಯಾಗಬೇಕು ಎಂದರು.
ಪ್ರಭ ಬೆಳವಂಗಲ ಮಾತನಾಡಿ ವಿದ್ಯುತ್, ಸಾರಿಗೆ, ನೀರು, ರಸ್ತೆ, ಮುಂತಾದ ಸೇವೆಗಳ ಖಾಸಗೀಕರಣವನ್ನು ಮಾಡಲಾಗುತ್ತಿದೆ. ಎಲ್ಲಾ ಸೇವೆಗಳಿಗೂ ಜನರೇ ಪೂರ್ಣವಾಗಿ ಹಣ ಪಾವತಿಸಿಬೇಕೆಂಬ ಕಾರ್ಪೊರೇಟ್ ನೀತಿಗಳನ್ನು ಜಾರಿಗೊಳಿಸಲಾಗುತ್ತಿದೆ. ಇವುಗಳನ್ನು ತಡೆಯದಿದ್ದರೆ ಮುಂದೆ ಸಾಮಾನ್ಯರಿಗೆ ಯಾವುದೂ ಸಿಗುವುದಿಲ್ಲ. ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕಾಗಿ ರೂಪಿಸಲಾಗಿರುವ ಕಾಯ್ದೆಗಳು ರದ್ದಾಗಲಿ ಎಂದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮುಂತಾದ ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಕೃಷ್ಣಾ ನೀರಿನಲ್ಲಿ ಈ ಭಾಗಕ್ಕೆ ನೀರನ್ನು ಒದಗಿಸಬೇಕು. ಕೆ.ಸಿ.ವಾಲಿ ಮತ್ತು ವೃಷಭಾವತಿ ಯೋಜನೆಗಳಿಂದ ಬೆಂಗಳೂರು ನಗರದ ಕೊಳಚೆ ನೀರನ್ನು ಜಿಲ್ಲೆಯ ಕೆರೆಗಳನ್ನು ತುಂಬಿಸುವುದನ್ನು ಕೈಬಿಡಬೇಕು ಎಂದರು.
ಈ ವೇಳೆ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಚ್ ಎನ್ ಮೋಹನ್ ಬಾಬು, ಎಸ್ ರುದ್ರಾರಾಧ್ಯ, ಹೆಚ್. ಹರೀಂದ್ರ, ಕೆ ವೆಂಕಟರಾಜು ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
