ದೊಡ್ಡಬಳ್ಳಾಪುರ :ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ಕ್ಷಣದ ನಿರ್ಲಕ್ಷ್ಯ ಇಡೀ ಬದುಕನ್ನೇ ದುಸ್ತರ ಮಾಡುತ್ತದೆ. ಅವಲಂಭಿತರನ್ನು ಅನಾಥವಾಗಿರುವ ಇಂತಹ ಅವಘಡಗಳ ತಡೆಗೆ ನಿಯಮಪಾಲನೆ ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕ್ರಾಂತಿ ಕಿರಣ್ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಪೊಲೀಸ್ ಇಲಾಖೆ, ಆಲ್ಟ್ರಾಟೆಕ್ ಸಿಮೆಂಟ್, ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಜಾಲಪ್ಪ ಪಾಲಿಟೆಕ್ನಿಕ್, ಶ್ರೀರಾಮ ನರ್ಸಿಂಗ್ ಕಾಲೇಜು, ಸುಜ್ಞಾನ ದೀಪಿಕಾ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮದ ಬಳಿಕ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡುವುದು. ದ್ವಿಚಕ್ರ ವಾಹನ ಚಾಲಕಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು, ಕಾರು-ಇತರೆ ವಾಹನಗಳ ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸುವುದು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವುದನ್ನು ತಡೆಯುವುದು ಅತ್ಯಗತ್ಯ ಎಂದು ಹೇಳಿದರು.

ಶ್ರೀರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ವನ್ನು ಆಚರಿಸಲಾಗುತ್ತದೆ. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಸಂಚಾರಿ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಅಲ್ಟ್ರಾಟೆಕ್ ಸಿಮೆಂಟ್ನ ಲಾಜಿಸ್ಟಿಕ್ ಜಿಎಂ ಪಂಕಜ್ ಶರ್ಮ, ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸಬಾರದು. ನಿಗದಿತ ವೇಗದ ಮಿತಿಯನ್ನು ಮೀರಿ ವಾಹನ ಚಲಾಯಿಸುವುದು ಅಕ್ಷಮ್ಯ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಜೀವಕ್ಕೆ ಅಪಾಯಕಾರಿ. ಈ ಬಗ್ಗೆ ನಿರಂತರ ಜಾಗೃತಿ ಮೂಡಿಸಲಾಗುವುದು ಎಂದರು.
ಸುಜ್ಞಾನ ದೀಪಿಕ ಸಂಸ್ಥೆಯ ಮಂಜುನಾಥ್, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಅತಿಥಿಗಳಿಗೆ ರಸ್ತೆ ಸುರಕ್ಷತಾ ನಿಯಮ ಪಾಲನೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ವಲಯ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರಾಂತೀಯ ಅಧ್ಯಕ್ಷ ಎಲ್.ಎನ್.ಪ್ರದೀಪ್ ಕುಮಾರ್, ವಕೀಲರ ಸಂಘದ ತಾಲೂಕು ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ, ಜಾಲಪ್ಪ ಪಾಲಿಟೆಕ್ನಿಕ್ ಪ್ರಾಂಶುಪಾಲ ನರಸಿಂಹರೆಡ್ಡಿ ಸೇರಿದಂತೆ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಲಯನ್ಸ್ ಕ್ಲಬ್ ಪದಾಧಿಕಾರಿಗಳು, ಶ್ರೀರಾಮ ನರ್ಸಿಂಗ್ ಕಾಲೇಜು ಮತ್ತು ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
*ಬೃಹತ್ ವಾಕಥಾನ್; ಗಮನ ಸೆಳೆದ ಯಮ-ಚಿತ್ರಗುಪ್ತ:*

ಇಲ್ಲಿನ ನೆಲದಾಂಜನೇಯಸ್ವಾಮಿ ದೇವಾಲಯದಿಂದ ಆರಂಭವಾದ ವಾಕಥಾನ್ ಭಗತ್ಸಿಂಗ್ ಕ್ರೀಡಾಂಗಣದವರೆಗೆ ನಡೆಯಿತು. ಯಮಧರ್ಮರಾಯ ಮತ್ತು ಚಿತ್ರಗುಪ್ತನ ವೇಷ ಧರಿಸಿದ್ದ ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ಸಾರ್ವಜನಿಕರಿಗೆ ಕರಪತ್ರ ನೀಡಿ, ಜಾಗೃತಿ ಮೂಡಿಸುವ ಮೂಲಕ ವಿನೂತನ ರೀತಿಯಲ್ಲಿ ಗಮನ ಸೆಳೆದರು.
