ಕರ್ನಾಟಕ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ ₹20 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇದಾಗಿದೆ.

ಕೆ.ಕೆ.ಆರ್.ಟಿ.ಸಿ. ಸಂಸ್ಥೆಗೆ ಈಗಾಗಲೆ 630 ಬಸ್ ನೀಡಲಾಗಿದೆ. ಮುಂದಿನ ದಿನದಲ್ಲಿ ಮತ್ತೆ 485 ಬಸ್ ನೀಡಲಾಗುವುದು.
ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ.
9 ಸಾವಿರ ಸಿಬ್ಬಂದಿ ನೇಮಕಕ್ಕೆ ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ ಮತ್ತು ಕೆ.ಕೆ.ಆರ್.ಟಿ.ಸಿ. ಸಂಸ್ಥೆಯಲ್ಲಿನ ಸಾರಿಗೆ ನೌಕರರು ಅಪಘಾತದಲ್ಲಿ ಮರಣ ಹೊಂದಿದಲ್ಲಿ ₹1 ಕೋಟಿ ಜೀವ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಿದ್ದು, ಇದು ದೇಶದಲ್ಲಿಯೆ ಮಾದರಿಯಾಗಿದೆ. ಒಂದೆಡೆ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಬೇಕು. ಇನ್ನೊಂದೆಡೆ ಕಾರ್ಮಿಕರ ಹಿತವು ಕಾಯಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಿಯಾಂಕ ಖರ್ಗೆ, ಶ್ರೀ ಶರಣ್ ಪ್ರಕಾಶ್ ಪಾಟೀಲ್, ಶ್ರೀ ಬಿ.ಆರ್. ಪಾಟೀಲ್, ಶ್ರೀ ಎಂ.ವೈ. ಪಾಟೀಲ್, ಡಾ. ಅಜಯ್ ಸಿಂಗ್, ಶ್ರೀ ಅಲ್ಲಮಪ್ರಭು ಪಾಟೀಲ್, ಶ್ರೀಮತಿ ಖನಿಜ ಫಾತಿಮಾ, ಶ್ರೀ ತಿಪ್ಪಣ್ಣಪ್ಪ ಕಮಕನೂರ್, ಶ್ರೀ ಜಗದೇವ ಗುತ್ತೇದಾರ್, ಶ್ರೀ ನೀಲಕಂಠರಾವ್ ಮುಲಗೆ, ಜಿಲ್ಲಾಧಿಕಾರಿ ಫೌಜಿಯ ತರನುಮ, ಶ್ರೀ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
