ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

Spread the love

ಬೆಂಗಳೂರು ಗ್ರಾಮಾಂತರ : ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.

 

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

 

ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು, ಅಗ್ನಿ ಶಾಮಕದಳ, ಟ್ರಾಫಿಕ್ (ವಾಹನ ದಟ್ಟಣೆ)ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

 

ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

 

ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲಭೂತ ಸೌಕರ್ಯ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

 

ಸಭೆಯಲ್ಲಿ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.