ಏ.21 ರಿಂದ ಜೂ.04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ : ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆ
Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ ಜಿಲ್ಲೆಯಾದ್ಯಂತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮತ್ತು ಚರ್ಮ ಗಂಟು ರೋಗದ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ.ರೈತರು ತಮ್ಮ ಜಾನುವಾರುಗಳಿಗೆ ರೋಗ ಬರದಂತೆ ತಡೆಯಲು ತಪ್ಪದೇ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

 

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ 7ನೇ ಸುತ್ತಿನ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದ ಅವರು ಕಾಲುಬಾಯಿ ಜ್ವರವು ವೈರಾಣುವಿನಿಂದ ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದೆ. ಈ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಅತಿ ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ನೇರ ಸಂಪರ್ಕ ಹಾಗೂ ಗಾಳಿಯ ಮೂಲಕ ಹರಡುತ್ತದೆ. ಚರ್ಮಗಂಟು ರಾಗವು ವೈರಾಣುವಿನಿಂದ ಬರುವಂತಹ ರೋಗ. ಹಾಗಾಗಿ ಈ ರೋಗಗಳನ್ನು ನಿಯಂತ್ರಿಸಲು ಜಾನುವಾರುಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆಯನ್ನು ಹಾಕಿಸಬೇಕು ಎಂದರು.

 

ಲಸಿಕೆ ಹಾಕುವವರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ತಪ್ಪದೇ ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವ ಮೂಲಕ ಆರ್ಥಿಕ ನಷ್ಟವನ್ನು ತಡೆಯಬಹುದು ಎಂದು ರೈತರಿಗೆ ಸಲಹೆ ನೀಡಿದರು.

 

ಜಾನುವಾರಗಳಿಗೆ ಅರೋಗ್ಯದ ಸಮಸ್ಯೆ ಕಂಡುಬಂದಲ್ಲಿ ‘1962’ ಪಶು ಸಹಾಯವಾಣಿಗೆ ಕರೆಮಾಡಿ, ತಮ್ಮ ವಿಳಾಸ, ಜಾನುವಾರು ಆರೋಗ್ಯ ಸಮಸ್ಯೆ, ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ನೀಡಿ, ನೊಂದಾಯಿಸಿದ ನಂತರ ಹತ್ತಿರದ ಸಂಚಾರಿ ತುರ್ತು ಪಶು ಚಿಕಿತ್ಸಾಲಯದ ಆಂಬುಲೆನ್ಸ್ ಸೇವೆಯನ್ನು ಪಡೆಯಬಹುದು ಎಂದರು.

 

ಪಶುಪಾಲಾನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕು ಪಶು ವೈದ್ಯಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *